ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಅಡ್ವಾಣಿ, ಜೋಷಿಗೆ ವಿಹೆಚ್‌ಪಿ ಆಹ್ವಾನ

Prasthutha|

ಲಖನೌ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರ ಲೋಕಾರ್ಕಾಪಣೆ ಕಾರ್ಯಕ್ರಮಕ್ಕೆ ಬಿಜೆಪಿ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್‌ ಜೋಷಿ ಅವರಿಗೆ ವಿಶ್ವ ಹಿಂದೂ ಪರಿಷತ್‌ ಆಹ್ವಾನ ನೀಡಿದೆ.

- Advertisement -

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರತಿನಿಧಿಗಳು ವಿನಂತಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು. ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ್ದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ವಯಸ್ಸನ್ನು ಗಮನದಲ್ಲಿ ಇರಿಸಿಕೊಂಡು ಕಾರ್ಯಕ್ರಮಕ್ಕೆ ಆಗಮಿಸದಂತೆ ಅಡ್ವಾಣಿ ಮತ್ತು ಜೋಷಿ ಅವರನ್ನು ವಿನಂತಿಸಲಾಗಿದೆ ಎಂದಿದ್ದರು.

ಇದನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ವಿಹೆಚ್‌ಪಿ ಮುಂದಾಗಿದ್ದು, ಈ ಇಬ್ಬರು ನಾಯಕರಿಗೂ ಆಹ್ವಾನ ನೀಡಿದೆ. ಇಬ್ಬರು ನಾಯಕರನ್ನೂ ಮಂಗಳವಾರ ಭೇಟಿ ಮಾಡಿ, ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಇಬ್ಬರೂ ಕಾರ್ಯಕ್ರಮಕ್ಕೆ ಆಗಮಿಸಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ ಎಂದು ವಿಹೆಚ್‌ಪಿ ಅಧ್ಯಕ್ಷ ಅಲೋಕ್‌ ಕುಮಾರ್‌ Xನಲ್ಲಿ ತಿಳಿಸಿದ್ದಾರೆ.

- Advertisement -

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ನಡೆದಿದ್ದ ಆಂದೋಲನಕ್ಕೆ ಉಸಿರು ನೀಡಿದವರೇ ಎಲ್‌ಕೆ ಅಡ್ವಾಣಿ ಮತ್ತು ಮುರಳಿ‌ ಮನೋಹರ್ ಜೋಷಿ. ಈಗ ಅಡ್ವಾಣಿಗೆ 96 ವರ್ಷ ಹಾಗೂ ಮುರಳಿ ಮನೋಹರ್‌ ಜೋಷಿಗೆ 90 ವರ್ಷ ಆಗಿದೆ.

1990ರಲ್ಲಿ ಅಡ್ವಾಣಿ ಅವರು ರಾಮಮಂದಿರ ನಿರ್ಮಾಣಕ್ಕೆ ಬೆಂಬಲ ಕೋರಿ ಸೋಮನಾಥದಿಂದ ಅಯೋಧ್ಯೆಗೆ ರಥಯಾತ್ರೆ ಕೈಗೊಂಡಿದ್ದರು. ಈ ಯಾತ್ರೆಯು ದೇಶದ ಕೆಲವು ಭಾಗಗಳಲ್ಲಿ ಕೋಮುಗಲಭೆಯನ್ನು ಪ್ರಚೋದಿಸಿತ್ತು.

Join Whatsapp