ಮತದಾರರ ಪಟ್ಟಿ ಅಕ್ರಮ| ನ್ಯಾಯಾಂಗ ತನಿಖೆಗೆ ಸಿಪಿಐ(ಎಂ) ಆಗ್ರಹ

Prasthutha|

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಮತದಾರರ ಪಟ್ಟಿ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಸಿಪಿಐ(ಎಂ) ಆಗ್ರಹಿಸಿದೆ.

- Advertisement -

ಬಿಬಿಎಂಪಿ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಲ್ಲಿ ಸುಮಾರು 6.69 ಲಕ್ಷ ನೈಜ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿರುವ ಪ್ರಕರಣದ ತನಿಖೆ ನಡೆಯುತ್ತಿದೆಯಾದರೂ ತನಿಖಾಧಿಕಾರಿಗಳ ಮೇಲೆ ಸರ್ಕಾರ ಪ್ರಭಾವಬೀರುವ ಸಾಧ್ಯತೆಗಳಿದ್ದು, ಹೀಗಾಗಿ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರಿಂದ ತನಿಖೆ ಆಗಬೇಕೆಂದು ಸಿಪಿಐ(ಎಂ) ಪಕ್ಷದ ದಕ್ಷಿಣ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಿ.ಎನ್.ಮಂಜುನಾಥ್ ಅವರು ಆಗ್ರಹಿಸಿದ್ದಾರೆ.

ಈ ಅಕ್ರಮವು ಪ್ರಜೆಗಳ ಮತದಾನದ ಹಕ್ಕನ್ನು ಕಸಿಯುವ ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ನಡೆಯಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 30 ಸಾವಿರದಿಂದ 60 ಸಾವಿರದವರೆಗೆ ಮತದಾರರನ್ನು ಕೈಬಿಡಲಾಗಿದೆ. ಚುನಾವಣೆಯಲ್ಲಿ ಸೋಲಿನ ದವಡೆಯಿಂದ ತಪ್ಪಿಸಿಕೊಳ್ಳಲು ಬಿಜೆಪಿ ಪಕ್ಷವು ಎಂತಹ ನೀಚ ಮಟ್ಟಕ್ಕೆ ಇಳಿಯುತ್ತದೆ ಎಂಬುದು ಇದೀಗ ಸಾಬೀತಾಗಿದೆ. ಚಿಲುಮೆ ಎಂಬ ಎನ್’ಜಿಒ ಸಂಸ್ಥೆಯ ಮೂಲಕ ಈ ಅಕ್ರಮ ನಡೆದಿದ್ದು, ಇದಕ್ಕೆ ಬಿಜೆಪಿ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -

ಈ ಅಕ್ರಮದ ಸುತ್ತ ದೊಡ್ಡ ಜಾಲವೇ ಹರಡಿಕೊಂಡಿದ್ದು, ರಾಜಕೀಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಈ ಕೃತ್ಯ ಎಸಗಿರುವುದು ಅಕ್ಷಮ್ಯ. ನಾಗರಿಕರ ಹಕ್ಕು, ಗೌಪ್ಯತೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿ. ಹೀಗಾಗಿ ಇದೊಂದು ಗಂಭೀರ ಪ್ರಕರಣವಾಗಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗವು ಇಬ್ಬರು ಉನ್ನತ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಉತ್ತರ ಜಿಲ್ಲಾ ಸಮಿತಿ ಸಿಪಿಐ(ಎಂ) ಕಾರ್ಯದರ್ಶಿ ಎನ್.ಪ್ರತಾಪ್ ಸಿಂಹ ಅವರು, ಈ ಕೃತ್ಯಕ್ಕೆ ಕೆಳಹಂತದಲ್ಲಿ ಕಂದಾಯ ನಿರೀಕ್ಷರು, ಕಂದಾಯ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದ್ದು, ಅಕ್ರಮವಾಗಿ ಇಲಾಖೆಯ ಪಾಸ್ವರ್ಡ್ ಗಳನ್ನು ಪಡೆದು ಬಿಜೆಪಿ ಕಚೇರಿಗಳಲ್ಲೇ ಈ ಪರಿಷ್ಕರಣೆ ನಡೆದಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಬಿಎಲ್ಓ ಹಂತದಲ್ಲಿ ರಾಜಕೀಯ ಪಕ್ಷಗಳ ಸಭೆಗಳನ್ನೂ ನಡೆಸದೇ, ಆಡಳಿತರೂಢ ಪಕ್ಷದ ಅಣತಿಯಂತೆ ಪರಿಷ್ಕರಿಸಲಾಗಿದೆ. ಜತೆಗೆ ಚಿಲುಮೆ ಸಂಸ್ಥೆ ಉದ್ಯೋಗಿಗಳಿಗೆ ಇಲಾಖೆಯಿಂದಲೇ ಬಿಎಲ್ಓ ಮತ್ತು ಬಿಎಲ್ಸಿ ಅಧಿಕಾರಿಗಳೆಂದು ಗುರುತಿನ ಚೀಟಿ ವಿತರಿಸಿರುವುದು ತನಿಖೆಯ ವೇಳೆ ಬಯಲಾಗಿದೆ. ಈ ವಿಚಾರದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ಮಹದೇವಪುರ, ಚಿಕ್ಕಪೇಟೆ ಸೇರಿದಂತೆ ಇತರೆ ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಲು 500 ಜನರ ಸಿಬ್ಬಂದಿಯನ್ನು ದಿನಗೂಲಿ ಲೆಕ್ಕದಲ್ಲಿ ನೇಮಿಸಿಕೊಂಡಿದ್ದ ಚಿಲುಮೆ ಸಂಸ್ಥೆಯು, ಅಕ್ರಮವಾಗಿ ಮತದಾರರ ವೈಯಕ್ತಿಕ ಮಾಹಿತಿಗಳನ್ನೂ ಸಂಗ್ರಹಿಸಿದೆ ಎಂಬುದು ತಿಳಿದುಬಂದಿದೆ. ಮತದಾರರ, ಜಾತಿ, ವಿಳಾಸ, ಉಪಜಾತಿ, ಮೊಬೈಲ್ ಸಂಖ್ಯೆ, ಬೆಂಬಲಿಸುವ ಪಕ್ಷ, ನೆಚ್ಚಿನ ರಾಜಕೀಯ ನಾಯಕ ಇತ್ಯಾದಿ ಮಾಹಿತಿಗಳನ್ನು ಸಂಗ್ರಹಿಸಿದೆ. ಈ ಮಾಹಿತಿಗಳನ್ನು ಮಾರಾಟ ಮಾಡಿ ಕೋಟ್ಯಾಂತರ ರೂಪಾಯಿ ಸಂಪಾದಿಸಿದೆ ಎಂದು ತನಿಖೆಯ ವೇಳೆ ಗೊತ್ತಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸಲು ಅಗತ್ಯ ಕ್ರಮ ಅನುಸರಿಸಬೇಕು. ವಾರ್ಡ್ ಮಟ್ಟದಲ್ಲಿ ನಾಗರಿಕರ ಸಭೆ ನಡೆಸಿ, ವಾಸ್ತವ ಮಾಹಿತಿ ಕಲೆ ಹಾಕಿ ಪರಿಷ್ಕರಣೆ ನಡೆಸಬೇಕೆಂದು ಸಿಪಿಐ(ಎಂ) ಬೆಂಗಳೂರು ಜಿಲ್ಲಾ ಸಮಿತಿಗಳು ಒತ್ತಾಯಿಸಿವೆ.

Join Whatsapp