ಪಶ್ಚಿಮಘಟ್ಟ ಸೂಕ್ಷ್ಮ ಪ್ರದೇಶ: ಕೇಂದ್ರ ಸರ್ಕಾರದ ಅಧಿಸೂಚನೆ ವಿರುದ್ಧ ಕಾನೂನು ಹೋರಾಟ- ಆರಗ ಜ್ಞಾನೇಂದ್ರ

Prasthutha|

►ಕೇಂದ್ರದ ವಿರುದ್ಧ ಗರಂ ಆದ ಬಿಜೆಪಿ ಸಚಿವರು

- Advertisement -

ಬೆಂಗಳೂರು: ಕೇಂದ್ರ ಪರಿಸರ ಸಚಿವಾಲಯ, ಪಶ್ಚಿಮ ಘಟ್ಟ ಸೂಕ್ಷ್ಮ ವಲಯದ ಬಗ್ಗೆ ಹೊರಡಿಸಿರುವ ಅಧಿಸೂಚನೆ ವಿರುದ್ಧ ಕಾನೂನಿನ ಹೋರಾಟ ನಡೆಸಲು ಮಲೆನಾಡು ಹಾಗೂ ಕರಾವಳಿ ಪ್ರದೇಶದ ಸಚಿವರು ಹಾಗೂ ಶಾಸಕರು ನಿರ್ಧಾರ ಕೈಗೊಂಡಿದ್ದಾರೆ.


ಗೃಹ ಸಚಿವ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಿದ್ದು, ಅಧಿಸೂಚನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಕೇಂದ್ರ ಪರಿಸರ ಸಚಿವಾಲಯದ ಅಧಿಸೂಚನೆ ಕುರಿತು ಸಭೆಯಲ್ಲಿ ಪಕ್ಷಭೇದ ಮರೆತು ಒಕ್ಕೊರಲಿನ ವಿರೋಧ ವ್ಯಕ್ತವಾಗಿದೆ.

- Advertisement -


ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಅಧಿಸೂಚನೆ ವಿರುದ್ಧ ಕಾನೂನಿನ ಹೋರಾಟ ಮಾಡುವುದಲ್ಲದೆ ಜನಾಭಿಪ್ರಾಯ ಸಂಗ್ರಹಕ್ಕೆ ನಿರ್ಧರಿಸಲಾಗಿದೆ. ಅಧಿಸೂಚನೆ ವಿರುದ್ಧ, ಪರಿಸರ ಸಚಿವರ ಬಳಿಗೆ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಲೊಕಸಭಾ ಸದಸ್ಯರ ಹಾಗೂ ಶಾಸಕರನ್ನು ಒಳಗೊಂಡ ನಿಯೋಗವನ್ನು ತೆಗೆದುಕೊಂಡು ಹೋಗಲಾಗುತ್ತದೆ ಎಂದು ತಿಳಿಸಿದರು.


ಒಂದು ವೇಳೆ ಅಧಿಸೂಚನೆ ಅನುಷ್ಠಾನಗೊಂಡರೆ ಗ್ರಾಮೀಣ ಭಾಗದ ಜನತೆಯ ಬದುಕು ಅಸಹನೀಯವಾಗುತ್ತದೆ ಎಂದ ಸಚಿವರು, ಅಧಿಸೂಚನೆಯನ್ನು ಶತಾಯಗತಾಯ ವಿರೋಧಿಸಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಸಂಪುಟ ಸದಸ್ಯರಾದ ಆನಂದ್ ಸಿಂಗ್, ಶಿವರಾಮ್ ಹೆಬ್ಬಾರ್, ಎಸ್ ಅಂಗಾರ, ಅಸೆಂಬ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿ B. S. ಯಡಿಯೂರಪ್ಪ ಹಾಗೂ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್, ಶಾಸಕರು ಭಾಗವಹಿಸಿದ್ದರು

Join Whatsapp