ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯ ನವರೇ?: ಹೆಚ್.ಡಿ ಕುಮಾರಸ್ವಾಮಿ

Prasthutha|

ಬೆಂಗಳೂರು: ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯ ನವರೇ? ಕುಮಾರಸ್ವಾಮಿ ಸರ್ಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಧೈರ್ಯವಿದ್ದರೆ ಸತ್ಯ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸವಾಲೆಸೆದಿದ್ದಾರೆ.

- Advertisement -


ಸಿಎಂ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ‘ಮೀರ್ಸಾದಿಕ’ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಸತ್ಯ ಹೇಳಿ ನೋಡೋಣ ಎಂದು ಸವಾಲೆಸೆಸಿದ್ದಾರೆ.


ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು? ಎಂದು ಟೀಕಿಸಿದ್ದಾರೆ.

Join Whatsapp