ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲಾ ಅಲ್ಪಸಂಖ್ಯಾತರ ಆರಾಧನಾಲಯಗಳ ಮೇಲೆ ದಾಳಿ: ಸಿದ್ದು ಕಿಡಿ

Prasthutha|

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಅಲ್ಪಸಂಖ್ಯಾತರು ಮತ್ತವರ ಪೂಜಾಸ್ಥಳಗಳ ಮೇಲೆ ದಾಳಿ ನಡೆಯುತ್ತಲೇ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಕಮಲ ಸರಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿನ ಮುಸ್ಲಿಮ್ ಮತ್ತು ಕ್ರಿಶ್ಷಿಯನ್ನರ ಮೇಲೆ ಮತ್ತು ಅವರ ಆರಾಧನಾಲಯದ ಮೇಲೂ ಕಿಡಿಗೇಡಿಗಳು ದಾಳಿ ಮಾಡುತ್ತಲೇ ಇದ್ದಾರೆ. ಇತ್ತೀಚೆಗಿನ ಚರ್ಚ್ ಗಳ ಮೇಲಿನ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ ಎಂದಿದ್ದಾರೆ.

ಇದೀಗ ಸರಕಾರ ಹೊರತಂದ ತರಾತುರಿಯ ಮತಾಂತರ ನಿಷೇಧ ಕಾಯ್ದೆ ಇಂತಹ ದಾಳಿಗಳಿಗೆ ದುಷ್ಕರ್ಮಿಗಳ ಕೈಗೆ ನೀಡುವ ಆಯುಧವೇ ಅಲ್ಲವೇ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಪ್ರಶ್ನಿಸಿದ್ದಾರೆ.

- Advertisement -

ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ.

ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಆಮಿಷ,ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲದೆ ಈ ಕಾಯ್ದೆಗೆ ಬೇರೆ ಸದುದ್ದೇಶಗಳೇನಿದೆ? ಎಂದು ಪ್ರಶ್ನಿಸಿದರು.

ಸಹಬಾಳ್ವೆ-ಸೌಹಾರ್ದತಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ, ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದು ಬಾಂಧವರೆಲ್ಲರೂ ಖಂಡಿಸಬೇಕು.

ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಅಲ್ಪಸಂಖ್ಯಾತರು ಮತ್ತು ಅವರ ಪೂಜಾಸ್ಥಳಗಳ ಮೇಲೆ ದಾಳಿ ನಡೆಯವುದಕ್ಕೆ ದೇಶ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಚರ್ಚ್ ಗಳ ಮೇಲೆ ನಡೆದಿರುವ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ತರಾತುರಿಯ ಮತಾಂತರ ನಿಷೇಧ ಕಾಯ್ದೆ ಇಂತಹ ದಾಳಿಗೆ ದುಷ್ಕರ್ಮಿಗಳ ಕೈಗೆ ನೀಡುವ ಆಯುಧವೇ ಬೊಮ್ಮಾಯಿಯವರೇ?

ಸ್ವಯೀಚ್ಛೆಯಿಂದ ಮತಾಂತರಗೊಳ್ಳುವ ಹಕ್ಕು ಸಂವಿಧಾನವೇ ನೀಡಿದೆ. ಇದರ ಹೊರತಾದ ಮತಾಂತರ ತಡೆಯಲು ಕಾನೂನು ಇದೆ. ಇರುವ ಕಾನೂನನ್ನು ಜಾರಿಗೆ ತರುವ ಪೊಲೀಸ್ ಇಲಾಖೆ ಮತ್ತು ತಪ್ಪು-ಒಪ್ಪುಗಳ ನ್ಯಾಯ ಒದಗಿಸುವ ನ್ಯಾಯಾಂಗದ ಮೇಲೆ ರಾಜ್ಯ ಸರ್ಕಾರಕ್ಕೆ ನಂಬಿಕೆ ಇಲ್ಲವೇ?

ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಕಾಯ್ದೆಯ ದುರುಪಯೋಗವನ್ನು ತಡೆಯಲು ಕಾಂಗ್ರೆಸ್ ಪಕ್ಷ ಖಂಡಿತ ಅವಕಾಶ ನೀಡುವುದಿಲ್ಲ. ಅನ್ಯಾಯ-ದೌರ್ಜನ್ಯಕ್ಕೊಳಗಾಗುವ ಪ್ರತಿಯೊಬ್ಬ ಅಲ್ಪಸಂಖ್ಯಾತ ಬಂಧುವಿನ ಜೊತೆ ನಮ್ಮ ಪಕ್ಷ ನಿಲ್ಲಲಿದ್ದು ಈ ಕಾಯ್ದೆಯ ವಿರುದ್ದ ನಮ್ಮ ಪಕ್ಷ ಜನಾಂದೋಲನ ನಡೆಸಲಿದೆ ಎಂದು ಸಿದ್ದರಾಮಯ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Join Whatsapp