ಉತ್ತರ ಪ್ರದೇಶದಲ್ಲಿ ಬಾಲಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕ: ಪ್ರೇಮ ವೈಫಲ್ಯಶಂಕೆ?

Prasthutha|

ಲಖನೌ: ಉತ್ತರ ಪ್ರದೇಶದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಬೀಳುವಂತೆ ಕಾಣುತ್ತಿಲ್ಲ. ಕೆಲವು ದಿನಗಳ ಹಿಂದಷ್ಟೇ ದಲಿತ ಯುವಕನ ಮೇಲೆ ಹಲ್ಲೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿ, ಆಡಳಿತ-ಪ್ರತಿ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೇ ಯುಪಿಯಲ್ಲಿ ವ್ಯಕ್ತಿಯೋರ್ವ ಬಾಲಕಿ ಮೇಲೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಬುಲಂದ್ ಶಹರ್ ಜಿಲ್ಲೆಯ ಮುಂಡಖೇಡ ಪ್ರದೇಶದಲ್ಲಿ ನಡೆದಿದೆ.

- Advertisement -

 ಮನೆ ಮುಂದೆ ಬಿದ್ದಿದ್ದ ಹಸುವಿನ ಸಗಣಿಯನ್ನು ತೆಗೆಯುವಂತೆ ಆರೋಪಿಯು ಬಾಲಕಿಗೆ ಹೇಳಿದ್ದಾನೆ. ಇದೇ ವಿಚಾರವಾಗಿ ಆಕೆಯೊಂದಿಗೆ ವಾಗ್ವಾದಕ್ಕಿಳಿದು ಆಕೆಯ ಮೇಲೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿದ್ದಾನೆ.

ಬಾಲಕಿ ಜೋರಾಗಿ ಕಿರುಚುವುದನ್ನು ಕಂಡ ನೆರೆ ಹೊರೆಯವರು ಕೂಡಲೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಸಂಬಂಧಿಕರು ಆರೋಪಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆಬೀಸಿದ್ದಾರೆ. ಪ್ರಾಥಮಿಕ ತನಿಖೆ ವೇಳೆ , ಇದೊಂದು ಪ್ರೇಮ ವೈಫಲ್ಯ ಎಂಬುದು ಗೊತ್ತಾಗಿದೆ. ಸಮಗ್ರ ತನಿಖೆ ಬಳಿಕ ಘಟನೆಗೆ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp